ಮಧೂರು ಕ್ಷೇತ್ರ ಅಷ್ಟಬಂಧ ಬ್ರಹ್ಮಕಲಶೋತ್ಸವ, ಮೂಡಪ್ಪಸೇವೆಗೆ ದಿನಗಣನೆ ಆರಂಭ
ಮಧೂರು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಮೂಡಪ್ಪ ಸೇವೆ ಕಾರ್ಯಕ್ರಮಗಳ ಆರಂಭಕ್ಕೆ ದಿನಗಣನೆ ಆರಂಭಗೊಂಡಿದೆ. ಈ ತಿಂಗಳ 27ರಿಂದ ಎಪ್ರಿಲ್ 7ರವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಮೂಡಪ್ಪ ಸೇವೆ ನಡೆಯಲಿರುವುದು. ಕಾರ್ಯಕ್ರಮಗಳ ಯಶಸ್ವಿಗಾಗಿ ಸಿದ್ಧತೆಗಳು ಭರದಿಂದ ಸಾಗಿದ್ದು, ಇದೀಗ ಅಂತಿಮ ಹಂತದಲ್ಲಿದೆ. ನಾಡಿನ ವಿವಿಧ ಭಾಗಗಳಲ್ಲಿ ಭಕ್ತರು ಸಮಿತಿ ರೂಪೀಕರಿಸಿದ್ದು, ವಿವಿಧ ಶ್ರಮದಾನ ಕಾರ್ಯಗಳಲ್ಲಿ ನಿರತರಾಗಿದ್ದಾರೆ. ಕಾರ್ಯಕ್ರಮದಲ್ಲಿ ಲಕ್ಷಾಂತರ ಮಂದಿ ಭಕ್ತರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಭಕ್ತರು ಆಗಮಿಸುವ ವಾಹನಗಳ ನಿಲುಗಡೆಗೆ ವಿವಿಧೆಡೆಗಳಲ್ಲಿ ವ್ಯವಸ್ಥೆ ಏರ್ಪಡಿಸಲಾಗಿದೆ. ಅದೇ ರೀತಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗಾಗಿ ವೇದಿಕೆಗಳ, ಚಪ್ಪರದ ನಿರ್ಮಾಣವೂ ನಡೆಯುತ್ತಿದೆ. ವಿವಿಧೆಡೆಗಳಲ್ಲಿ ವಿವಿಧ ಕ್ಲಬ್, ಸಂಘಟನೆಗಳಿಂದ ಸ್ವಾಗತ ಕಮಾನುಗಳನ್ನು ನಿರ್ಮಿಸಲಾಗಿದೆ. ಮಧೂರು ಪಂಚಾಯತ್ನ ಪ್ರಧಾನ ಪೇಟೆಯಾದ ಉಳಿಯತ್ತಡ್ಕದಲ್ಲಿ ಕೇಸರಿ ಧ್ವಜಗಳಿಂದ ಅಲಂಕರಿಸಲಾಗಿದೆ.